ಸ್ಥಳೀಯ ಸುದ್ದಿ

ಜನಸಾಮಾನ್ಯರ ಸಮಸ್ಯೆಗಳ ಸ್ಪಂದನೆ -ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮೂಲಕ ಗ್ರಾಮದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ,ಸಮಸ್ಯೆಗಳಿಗೆ ಸ್ಪಂದನೆ ಸೇರಿದಂತೆ ಅನೇಕ ಮಹತ್ವದ ಕಾರ್ಯಗಳ ಸರಳ ಜಾರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದಲ್ಲಿ ಇಂದು ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ,ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಸಸಿ ನೆಟ್ಟು,ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಜನರ ಬಳಿಗೆ ಆಡಳಿತ ಯಂತ್ರ ತೆಗೆದುಕೊಂಡು ಹೋಗುವ ಮಹತ್ವಾಕಾಂಕ್ಷೆಯೊಂದಿಗೆ ಸರ್ಕಾರವು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರೂಪಿಸಿದೆ.ಜೊತೆಗೆ ಎಲ್ಲಾ ತಾಲೂಕುಗಳಲ್ಲಿ ಅಲ್ಲಿನ ತಹಸೀಲ್ದಾರರು ಕೂಡ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಜನಸಾಮಾನ್ಯರ ಬಳಿಯೇ ಆಡಳಿತದ ಹಿರಿಯ ಅಧಿಕಾರಿಗಳು ಬರುವುದರಿಂದ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ,ಪರಿಹಾರ ಸಾಧ್ಯವಾಗಲಿದೆ. ಅರವಟಗಿಯಲ್ಲಿ ಜಲಜೀವನ್ ಮಿಷನ್ ಅಡಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ 53 ಲಕ್ಷ ರೂ.ಗಳಲ್ಲಿ ಯಶಸ್ವಿಯಾಗಿ ಅನುಷ್ಠಾನವಾಗಿರುವದರಿಂದ,ಮನೆ ಬಾಗಿಲಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿರುವುದು ಸಂತಸದ ಸಂಗತಿಯಾಗಿದೆ.ನೀರಿಗಾಗಿ ಕಿಲೋ ಮೀಟರುಗಟ್ಟಲೇ ದೂರ ಅಲೆಯುವುದು ತಪ್ಪಿದೆ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳ ಕುರಿತು ಗ್ರಾಮಸ್ಥರಿಗೆ ತಿಳುವಳಿಕೆಯು ಈ ಸಂದರ್ಭದಲ್ಲಿ ದೊರೆಯುತ್ತದೆ. ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡುವ ವಿವಿಧ ಪಿಂಚಣಿಗಳ ಅಹವಾಲುಗಳಿಗೆ ಪರಿಹಾರ ಸಿಗುತ್ತದೆ. 5 ಲಕ್ಷ ರೂ.ವರೆಗೆ ವೈದ್ಯಕೀಯ ವೆಚ್ಚ ಸಿಗುವ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡುಗಳನ್ನು ಕೂಡ ವಿತರಿಸಲಾಗುತ್ತಿದೆ.ಜಿಲ್ಲೆಯಲ್ಲಿ ಕಂದಾಯ ಭೂಮಿ ಲಭ್ಯ ಇರುವ ಎಲ್ಲಾ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒದಗಿಸಲಾಗಿದೆ.ಸರ್ಕಾರಿ ಭೂಮಿ ಲಭ್ಯವಿಲ್ಲದ 19 ಗ್ರಾಮಗಳಲ್ಲಿ ಸ್ಮಶಾನಕ್ಕಾಗಿ ಭೂಮಿ ಖರೀದಿಸಲು 3.92 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಗ್ರಾ.ಪಂ‌.ಅಧ್ಯಕ್ಷೆ ಅಮೀನಾ ಲಾಲ್‌ಸಾಬ ಕಾಶನಕುಂಟಿ,ಉಪಾಧ್ಯಕ್ಷ ಅಶೋಕ ಜೋಡಟ್ಟಿಯವರ್,ಕೆಸಿಸಿ ಬ್ಯಾಂಕ್ ನಿರ್ದೇಶಕ ಉಮೇಶ ಬೊಮ್ಮಣ್ಣವರ,ಉಪವಿಭಾಗಾಧಿಕಾರಿ ಅಶೋಕ ತೇಲಿ,ಜಿಪಂ ಯೋಜನಾ ನಿರ್ದೇಶಕ ಬಿ.ಎಸ್.ಮೂಗನೂರಮಠ,ಜಿಪಂ ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಶೇಖರ ಮುನವಳ್ಳಿ, ಭೂ ದಾಖಲೆಗಳ ಉಪನಿರ್ದೇಶಕ ವಿಜಯಕುಮಾರ್, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಮಂಜುನಾಥ ಡೊಂಬರ,ತೋಟಗಾರಿಕೆ ಉಪನಿರ್ದೇಶಕ ಡಾ.ಕಾಶಿನಾಥ ಭದ್ರಣ್ಣವರ,ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಶಶಿ ಪಾಟೀಲ, ತಹಸೀಲ್ದಾರ ಅಮರೇಶ ಪಮ್ಮಾರ,ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಎನ್.ತನುಜಾ ಮತ್ತಿತರರು ಇದ್ದರು.

ಇದೇ ಸಂದರ್ಭದಲ್ಲಿ ಛತ್ರಪತಿ ಶಿವಾಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಬಾಬಾಜಾನ್ ಮುಲ್ಲಾ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತ ಪಡಿಸಿದರು.

ಗ್ರಾಮದ ವಿವಿಧ ಬೇಡಿಕೆಗಳ ಕುರಿತು ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾಧಿಕಾರಿಗಳು ಸ್ವೀಕರಿಸಿದರು.

Related Articles

Leave a Reply

Your email address will not be published. Required fields are marked *

Back to top button